ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ತಂತ್ರ ಒಂದುಕಡೆಯಾದರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದ ಪ್ರತಿತಂತ್ರ ರೂಪಿಸುತ್ತಿದೆ.
ಈ ಮಧ್ಯೆ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ"ವಾಗಿದೆ. ನಾನು ಆತ್ಮಸಾಕ್ಷಿಯನ್ನು ನಂಬುತ್ತೇನೆ ಎಂದಿದ್ದಾರೆ.
ನಾನು ಪಕ್ಷಕ್ಕೆ ಯಾವುದೇ ಮುಜುಗರವನ್ನುಂಟುಮಾಡಲು ಮತ್ತು ಪಕ್ಷವನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಹೇಳಿದ್ದಾರೆ.
